ಗೋಕಾಕ:ಮತದಾರ ಯಾದಿಯಲ್ಲಿ ತಮ್ಮ ಹೆಸರು ನೊಂದಣಿ ಮಾಡಿಕೊಳ್ಳಿ : ಜೆ.ಎಂ.ನದಾಫ
ಮತದಾರ ಯಾದಿಯಲ್ಲಿ ತಮ್ಮ ಹೆಸರು ನೊಂದಣಿ ಮಾಡಿಕೊಳ್ಳಿ : ಜೆ.ಎಂ.ನದಾಫ
ನಮ್ಮ ಬೆಳಗಾವಿ ಸುದ್ದಿ , ಬೆಟಗೇರಿ ಪೆ 23 :
ಗ್ರಾಮದಲ್ಲಿರುವ 18 ವರ್ಷ ವಯಸ್ಸು ತುಂಬಿದ ಯುವಕ-ಯುವತಿಯರು ತಪ್ಪದೇ ಮತದಾರ ಯಾದಿಯಲ್ಲಿ ತಮ್ಮ ಹೆಸರು ನೊಂದಣಿ ಮಾಡಿಕೊಳ್ಳಬೇಕು ಎಂದು ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಜೆ.ಎಂ.ನದಾಫ್ ಹೇಳಿದರು.
ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಕಾರ್ಯಾಲಯ ಮತ್ತು ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆ ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಯೋಗದೊಂದಿಗೆ ಶನಿವಾರ ಫೆ.23 ರಂದು ಗ್ರಾಮದ ಪ್ರಮುಖ ಬೀದಿಗಳಲ್ಲಿ ಹಮ್ಮಿಕೊಂಡ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ ಕುರಿತು ವಿಶೇಷ ನೊಂದಣಿ ಕಾರ್ಯಾಚರಣೆಯ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈಗಾಗಲೇ ಮತದಾರ ಯಾದಿಯಲ್ಲಿ ತಮ್ಮ ಹೆಸರು ವರ್ಗಾವಣೆ ಮತ್ತು ಲೋಪದೋಷಗಳಿದ್ದರೆ, ಸೂಕ್ತ ದಾಖಲೆಗಳನ್ನು ಸ್ಥಳೀಯ ಬಿಎಲ್ಒಗೆ ಕೊಟ್ಟು ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಹಾಗೂ ಎಲ್ಲ ಯುವಕ-ಯುವತಿಯರು ಮತದಾರರ ಯಾದಿಯಲ್ಲಿ ತಮ್ಮ ಹೆಸರು ನೊಂದಾಯಿಸಿಕೊಳ್ಳುವ ಅವಕಾಶವಿದೆ ಎಂದು ಗ್ರಾಮ ಲೆಕ್ಕಾಧಿಕಾರಿ ಜೆ.ಎಂ.ನದಾಫ್ ತಿಳಿಸಿದರು.
ಊರಿನ ಪ್ರಮುಖ ಬೀದಿಗಳಲ್ಲಿ ಮತದಾರರ ನೊಂದಣಿ ಕುರಿತು ಹಲವಾರು ಘೋಷಣೆ ಕೂಗುತ್ತಾ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಲ್ಲಿಯ ಉಭಯ ಶಾಲಾ ಮಕ್ಕಳಿಂದ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಂದ ಜಾಗೃತಿ ಜಾಥಾ ನಡೆದ ಬಳಿಕ ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು.
ಗ್ರಾಪಂ ಅಧ್ಯಕ್ಷ ಲಕ್ಷ್ಮಣ ಚಂದರಗಿ, ಬಸನಗೌಡ ದೇಯಣ್ಣವರ, ಈಶ್ವರ ಮೇಳೆಣ್ಣವರ, ಗ್ರಾಪಂ ಸದಸ್ಯ ಸುಭಾಷ ಕರೆಣ್ಣವರ, ಬಸವರಾಜ ಪಣದಿ, ಉಭಯ ಶಾಲೆಯ ಮುಖ್ಯ ಶಿಕ್ಷಕರಾದ ವೈ.ಸಿ. ಶೀಗಿಹಳ್ಳಿ, ಆರ್.ಬಿ.ಬೆಟಗೇರಿ, ಸಿದ್ದಣ್ಣ ಸನದಿ, ಎಸ್.ಜಿ.ಮಠಪತಿ, ಎಮ್.ಎಸ್.ಪಾಟೀಲ, ರುದ್ರಪ್ಪ ಕಾಡವ್ವಗೋಳ, ಬಿಎಲ್ಒಗಳು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಮಕ್ಕಳು, ಇತರರು ಇದ್ದರು.