RNI NO. KARKAN/2006/27779|Sunday, June 15, 2025
You are here: Home » breaking news » ಬೆಳಗಾವಿ:ಸ್ವಾತಂತ್ರ್ಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಹೊಣೆಗಾರಿಕೆ ನಮ್ಮ ಮೇಲಿದೆ : ಸಚಿವ ರಮೇಶ್

ಬೆಳಗಾವಿ:ಸ್ವಾತಂತ್ರ್ಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಹೊಣೆಗಾರಿಕೆ ನಮ್ಮ ಮೇಲಿದೆ : ಸಚಿವ ರಮೇಶ್ 

ಸ್ವಾತಂತ್ರ್ಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಹೊಣೆಗಾರಿಕೆ ನಮ್ಮ ಮೇಲಿದೆ : ಸಚಿವ ರಮೇಶ್

ಬೆಳಗಾವಿ ಅ 15:  ಸ್ವಾತಂತ್ರ್ಯೋತ್ಸವದ ಸಂದರ್ಭ  ದೇಶದ ಏಕತೆ, ಸಮಗ್ರತೆಯ ರಕ್ಷಣೆ ಜತೆಗೆ ಪ್ರಗತಿಯ ರಥವನ್ನು ಹಾಗೂ ಸ್ವಾತಂತ್ರ್ಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು  ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 71ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಸ್ವಾತಂತ್ರ್ಯ’ ಎಂದರೆ ಸ್ವಾಭಿಮಾನ. ತಮ್ಮ ಬದುಕನ್ನು ಪಣಕ್ಕಿಟ್ಟು ದೇಶಕ್ಕೆ ಇಂತಹ ಸ್ವಾಭಿಮಾನವನ್ನು ತಂದುಕೊಟ್ಟ ಮಹನೀಯರನ್ನು ನೆನಪಿಸಿಕೊಳ್ಳಬೇಕಿದೆ. ದೇಶ ಸ್ವತಂತ್ರಗೊಂಡು 70 ವರ್ಷಗಳಾದವು. ಮಹಾತ್ಮಾ ಗಾಂಧೀಜಿ  ನೇತೃತ್ವದಲ್ಲಿ ಅಹಿಂಸಾತ್ಮಕ ಹೋರಾಟದ ಮೂಲಕ ಭಾರತೀಯರು ಗಳಿಸಿದ ಸ್ವಾತಂತ್ರ್ಯವು ಜಗತ್ತಿನ ರಾಜಕೀಯ ಚರಿತ್ರೆಯಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದೆ ಎಂದು ಅವರು ಹೇಳಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮಾ ಗಾಂಧೀಜಿ, ಸುಭಾಷ್‍ಚಂದ್ರ ಬೋಸ್, ಸರ್ದಾರ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರೂ, ಲಾಲ್‍ಬಹದ್ದೂರ ಶಾಸ್ತ್ರಿ, ಡಾ.ಬಾಬಾಸಾಹೇಬ್ ಅಂಬೇಡ್ಕರ್, ಬಾಲಗಂಗಾಧರ ಟಿಳಕ ಸೇರಿ ಸ್ವಾತಂತ್ರ್ಯ ಸೇನಾನಿಗಳೆಲ್ಲರನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಜಿಲ್ಲೆಯ ಪಾತ್ರ ಕಡಿಮೆ ಇಲ್ಲ. ಅಪ್ರತಿಮ ಹೋರಾಟಗಾರರು, ಅಪ್ಪಟ ದೇಶಭಕ್ತರು, ಸ್ವಾಭಿಮಾನಿ ಸೇನಾನಿಗಳನ್ನು ದೇಶಕ್ಕೆ ಕೊಡುಗೆ ನೀಡಿರುವ ಬೆಳಗಾವಿ ಜಿಲ್ಲೆಯು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿತ್ತು ಎಂದು ಅವರು ಸ್ಮರಿಸಿದರು.
ಕಿತ್ತೂರು ರಾಣಿ ಚೆನ್ನಮ್ಮ ಮೊಳಗಿಸಿದ ಸ್ವಾತಂತ್ರ್ಯದ ಕಹಳೆಯು ಕಾಡ್ಗಿಚ್ಚಿನಂತೆ ಎಲ್ಲೆಡೆ ಹಬ್ಬಿತು. ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಹೊಂದಿದ್ದ ಚೆನ್ನಮ್ಮ, ಆಂಗ್ಲರ ಈಸ್ಟ್ ಇಂಡಿಯಾ ಕಂಪೆನಿಗೆ ದುಸ್ವಪ್ನವಾಗಿ ಕಾಡಿದರು ಎಂದು ಸಚಿವ ರಮೇಶ ಹೇಳಿದರು.

ಕಿತ್ತೂರು ಸಂಸ್ಥಾನದಲ್ಲಿ ಸೇನಾಧಿಪತಿಯಾಗಿದ್ದ ಸಂಗೊಳ್ಳಿ ರಾಯಣ್ಣ ಆಂಗ್ಲರ ಬಂದೂಕುಗಳಿಗೆ ಬೆದರದೆ ತಾಯ್ನಾಡಿನ ಸ್ವಾತಂತ್ರ್ಯಕ್ಕಾಗಿ ನೇಣುಗಂಬಕ್ಕೇರಿದ ಅಪ್ರತಿಮ ದೇಶಭಕ್ತ. ಅಂತಹ ರಾಯಣ್ಣ ಹುಟ್ಟಿದ್ದು ಆಗಸ್ಟ್ 15ರಂದು ವೀರಮರಣವನ್ನಪ್ಪಿದ್ದು ಜನವರಿ 26. ಇದು ಗಮನ ಸೆಳೆಯುವಂಥದು ಎಂದರು.
ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಗಂಗಾಧರ ದೇಶಪಾಂಡೆ. ‘ಕರ್ನಾಟಕದ ಸಿಂಹ’ ಹಾಗೂ ‘ಕರ್ನಾಟಕದ ಖಾದಿ ಭಗೀರಥ’ ಎಂದು ಗುರುತಿಸಿಕೊಂಡಿದ್ದರು.  ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ, ಮುಂಚೂಣಿಯಲ್ಲಿದ್ದ ಮಹನೀಯರೆಲ್ಲರನ್ನೂ ನೆನಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಮುಖ್ಯಮಂತ್ರಿ  ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕ ಸರ್ಕಾರವು ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ.  ನಮ್ಮ  ಕಳೆದ ನಾಲ್ಕು ವರ್ಷಗಳಲ್ಲಿ ನುಡಿದಂತೆ ನಡೆದಿದೆ. ಭರವಸೆ ನೀಡಿದಂತೆ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ಸಚಿವ ರಮೇಶ ತಿಳಿಸಿದರು.
ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಯಾವ ಅಡೆತಡೆಯೂ ಇಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.29 ಪ್ರಮಾಣದ ಮಳೆ ಕೊರತೆಯಿಂದ ಒಟ್ಟು 4.68 ಲಕ್ಷ ಹೆಕ್ಟೇರ್‍ಗಳಷ್ಟು ಮುಂಗಾರು ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನಲ್ಲಿ ರಿಯಾಯಿತಿ ದರದಲ್ಲಿ ಒಟ್ಟು 1.43 ಲಕ್ಷ ರೈತರಿಗೆ 39 ಸಾವಿರ ಕ್ವಿಂಟಲ್ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಪೂರೈಸಲಾಗಿದ್ದು, ಜಿಲ್ಲೆಯ ಎಲ್ಲ ಕಡೆ ಬಿತ್ತನೆ ಬೀಜ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಯಾವುದೇ ತಕರಾರುಗಳು ಬರದಂತೆ ನಿಗಾವಹಿಸಲಾಗಿದೆ ಎಂದು ಸಚಿವ ರಮೇಶ ತಿಳಿಸಿದರ.ು
“ಕೃಷಿ ಭಾಗ್ಯ ಯೋಜನೆ” ಜಿಲ್ಲೆಯಲ್ಲಿ ಜಾರಿಗೊಂಡಿದೆ.  ಈಗಾಗಲೇ 10 ಸಾವಿರಕ್ಕೂ ಅಧಿಕ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸಲಾಗಿದೆ ಇದಕ್ಕಾಗಿ 95 ಕೋಟಿ ರೂಪಾಯಿ ಸಹಾಯಧನ ಒದಗಿಸಲಾಗಿದೆ. 2017-18 ನೇ ಸಾಲಿನಿಂದ ಕೃಷಿ ಭಾಗ್ಯ ಯೋಜನೆಯನ್ನು ಬೆಳಗಾವಿ ಹಾಗೂ ಖಾನಾಪೂರ ತಾಲೂಕಿಗೆ ಸರ್ಕಾರ ವಿಸ್ತರಿಸಿದೆ. ಜಿಲ್ಲೆಯ 10 ತಾಲೂಕುಗಳಲ್ಲಿಯೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಪಡಿತರ ಚೀಟಿಗಳ ಸದಸ್ಯರಿಗೆ ಉಚಿತವಾಗಿ 7 ಕೆ.ಜಿ. ಅಕ್ಕಿ, 1 ಕೆ.ಜಿ. ತೊಗರಿ ಬೇಳೆಯನ್ನು ಪ್ರತಿ ಕೆ.ಜಿ.ಗೆ 38 ರೂಪಾಯಿಯಂತೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. 2017ನೇ ಸಾಲಿನಲ್ಲಿ ಹೊಸ ಬಿಪಿಎಲ್ ಪಡಿತರ ಚೀಟಿಗಳಿಗಾಗಿ 2.13 ಲಕ್ಷ ಅರ್ಜಿಗಳು ಸ್ವೀಕರಿಸಿದ್ದು. ಅವುಗಳ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದರು.
ಗಂಭೀರ ಕಾಯಿಲೆಗಳಿಂದ ಬಳಲುವ ಎ.ಪಿ.ಎಲ್ ಕುಟುಂಬಗಳಿಗೆ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸಹ-ಪಾವತಿ ಆಧಾರದ ಮೇಲೆ ಚಿಕಿತ್ಸೆ ಒದಗಿಸುವ ‘ರಾಜೀವ ಆರೋಗ್ಯಭಾಗ್ಯ’ ಯೋಜನೆಯನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಲ್ಲಿ ಇಲ್ಲಿಯವರೆಗೆ ಒಟ್ಟು 581 ಫಲಾನುಭವಿಗಳಿಗೆ ಶಸ್ತ್ರ ಚಿಕಿತ್ಸೆ ನೇರವೇರಿಸಿ ರೂ 2.32ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ ಎಂದು ಸಚಿವರು ವಿವರಿಸಿದರು.
ರಾಜ್ಯ ಸರ್ಕಾರಿ ನೌಕಕರು ಮತ್ತು ಅವರ ಕುಟುಂಬಗಳ ಅವಲಂಬಿತ ಸದಸ್ಯರಿಗೆ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ತೃತೀಯ ಹಂತದ ಚಿಕಿತ್ಸೆ ಒದಗಿಸಲು ‘ಜ್ಯೋತಿ ಸಂಜೀವಿನಿ’ ಯೋಜನೆ ಜಾರಿಗೊಳಿಸಿದ್ದೇವೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯ ಚಿಕ್ಕೋಡಿ.ರಾಮದುರ್ಗ.ಗೋಕಾಕ ತಾಲೂಕಾ ಆಸ್ಪತ್ರೆಗಳಲ್ಲಿ ಮೂತ್ರಪಿಂಡ ರೋಗಿಗಳಿಗಾಗಿ ಡಯಾಲಿಸಸ್ ಸೇವೆಯನ್ನು ಪ್ರಾರಂಭಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸ್ತುತ 51 ಮೆಟ್ರಿಕ್ ಪೂರ್ವ ಬಾಲಕರ ಹಾಗೂ 15 ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳು ಮತ್ತು 18 ಮೆಟ್ರಿಕ್ ನಂತರದ ಬಾಲಕರ ಮತ್ತು 8 ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಪ.ಜಾತಿಯ 28 ಮೊರಾರ್ಜಿ ದೇಸಾಯಿ/ಕಿತ್ತೂರ ರಾಣಿ ಚನ್ನಮ್ಮ/ಅಟಲ್ ಬಿಹಾರಿ ಮಾದರಿ/ಇಂದಿರಾ ವಸತಿ ಶಾಲೆಗಳು ಹಾಗೂ 1 ರಿಂದ 5ನೇ ತರಗತಿಯವರಿಗಾಗಿ ಒಟ್ಟು 03 ಆಶ್ರಮ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ಜಿಲ್ಲೆಯಲ್ಲಿ  ವಿವಿಧ ಇಲಾಖೆಗಳಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಮಾಹಿತಿ ನೀಡಿದ ಸಚಿವರು, ರಾಜ್ಯ ಸರ್ಕಾರ ಬಡವರು, ಶೋಷಿತರು, ದೀನ ದಲಿತರು ಮತ್ತು ಆರ್ಥಿಕ ದುರ್ಬಲರ ಪರವಾಗಿದೆ, ಅಭಿವೃದ್ಧಿಗೆ ಬದ್ಧವಾಗಿದೆ ಎಂದರು.

ಬದುಕನ್ನೇ ಪಣಕ್ಕಿಟ್ಟು ಹೋರಾಡಿದ,  ಸೆರೆಮನೆ ಅನುಭವಿಸಿದ,  ಆಂಗ್ಲರ ಗುಂಡಿಗೆ ಬಲಿಯಾದ,  ನೇಣುಗಂಬ ಏರಿದ ಸೇನಾನಿಗಳ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ದೊರಕಿದೆ. ಎಲ್ಲ   ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದು ವಿಶ್ವದ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮಿದೆ.  ದೇಶದ ಏಕತೆ-ಸಮಗ್ರತೆಯ ರಕ್ಷಣೆಯ ಜತೆಗೆ ಪ್ರಗತಿಯ ಈ ರಥವನ್ನು ಹಾಗೂ ಸ್ವಾತಂತ್ರ್ಯ ವನ್ನು ನಮ್ಮ ಮುಂದಿನ ಪೀಳಿಗೆಗೆ ತಲುಪಿಸುವ ಹೊಣೆಗಾರಿಕೆ ಇದೆ ಎಂದು ಸಚಿವರು ಹೇಳಿದರು.

ಜಿಲ್ಲೆಯ ಹಿರಿಯ ಸ್ವಾತಂತ್ರ್ಯಯೋಧರಾದ ಸೋಮಲಿಂಗಪ್ಪ ಮಳಗಲಿ(ಹುದಲಿ), ಗಂಗಪ್ಪ ಮಾಳಗಿ (ಬೆಳಗಾವಿ), ಪವಾಡೆಪ್ಪ ಗೂಳಬಾವಿ(ಬೆಳಗಾವಿ), ಗಂಗಾಧರ ಕಾಮತ(ಬೆಳಗಾವಿ) ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಸನ್ಮಾನಿಸಿದರು.ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ  ಅತೀ ಹೆಚ್ಚು ಅಂಕ ಪಡೆದಿರುವ ಸ್ನೇಹಲ್ ಕಣಬರಗಿ, ಪೂಜಾ ಅಬ್ಬರ, ಸ್ನೇಹಾ ಅಂಬಡಗಟ್ಟಿ ಹಾಗೂ ಚಂದನ ಮಲಗೌಡರ ಅವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಲ್ಯಾಪಟಾಪ್ ವಿತರಿಸಲಾಯಿತು.

ಸಂಸದ ಸುರೇಶ ಅಂಗಡಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಶಾಸಕರಾದ ಫಿರೋಜ್ ಸೇಠ, ಸಂಜಯ ಪಾಟೀಲ, ಮಹಾಪೌರರಾದ ಸಂಜೋತಾ ಬಾಂದೇಕರ, ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ, ಉತ್ತರ ವಲಯ ಐಜಿಪಿ ರಾಮಚಂದ್ರರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್., ಪೊಲೀಸ್ ಆಯುಕ್ತರಾದ ಕೃಷ್ಣಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್.ರವಿಕಾಂತೇಗೌಡ, ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ, ಉಪ ವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ ಸೇರಿ ವಿವಿಧಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು, ವಿವಿಧ ಶಾಲೆಯ ಮಕ್ಕಳು  ಪಾಲ್ಗೊಂಡಿದ್ದರು.
ಸಿಆರ್‍ಪಿಎಫ್‍ನ ಕೋಬ್ರಾ ಪಡೆ, ಐಟಿಬಿಪಿ, ಕೆಎಸ್‍ಆರ್‍ಪಿ, ಸಶಸ್ತ್ರ ಪೊಲೀಸ್, ಗೃಹರಕ್ಷಕದಳ, ಎನ್‍ಸಿಸಿ, ಸ್ಕೌಟ್ಸ್-ಗೈಡ್ಸ್, ಸೇವಾದಳ, ಮಹೇಶ್ವರಿ ಅಂಧ ಮಕ್ಕಳ ಶಾಲೆಯ ತಂಡದವರು ಆಕರ್ಷಕ ಪಥಸಂಚಲನ ನಡೆಸಿಕೊಟ್ಟರು.
ಪಥಸಂಚಲನದಲ್ಲಿ ಉತ್ತಮ ಪ್ರದರ್ಶನ ತೋರಿದ ತಂಡಗಳ ಮುಖ್ಯಸ್ಥರನ್ನು ಗಣ್ಯರು ಸನ್ಮಾನಿಸಿದರು. ನಂತರ ವಿವಿಧ ಶಾಲೆಗಳ ಸಾವಿರಾರು ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

Related posts: