ಮೂಡಲಗಿ:ಏ.23 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಪ್ರಚಂಡ ಬಹುಮತದಿಂದ ಆರಿಸಿ
ಏ.23 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಪ್ರಚಂಡ ಬಹುಮತದಿಂದ ಆರಿಸಿ
ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಮಾ 18 :
ಕೇಂದ್ರ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಏ.23 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಪರ ಮತ ಕೇಳಬೇಕು. ಬಿಜೆಪಿ ಅಭ್ಯರ್ಥಿಯನ್ನು ಪ್ರಚಂಡ ಬಹುಮತದಿಂದ ಆರಿಸಿ ತರಲು ಕಾರ್ಯಕರ್ತರು ಒಗ್ಗಟ್ಟಿನಿಂದ ದುಡಿಯಬೇಕೆಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೂಳಪ್ಪ ಹೊಸಮನಿ ಹೇಳಿದರು.
ರವಿವಾರದಂದು ಅರಭಾವಿ, ತುಕ್ಕಾನಟ್ಟಿ, ಕಲ್ಲೋಳಿ, ನಾಗನೂರ, ಮೂಡಲಗಿ, ಹಳ್ಳೂರ ಮಹಾಶಕ್ತಿಕೇಂದ್ರಗಳ ಬಿಜೆಪಿ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾರ್ಯಕರ್ತರು ತಮ್ಮಲ್ಲಿಯ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾಗಿ ದುಡಿಯುವಂತೆ ಇದೇ ಸಂದರ್ಭದಲ್ಲಿ ಕೋರಿದರು.
ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸರ್ವಾಂಗೀಣ ಪ್ರಗತಿಗೆ ಹಗಲಿರುಳು ದುಡಿಯುತ್ತಿದ್ದಾರೆ. ದಿನದ 18 ತಾಸುಗಳಷ್ಟು ಸಮಯವನ್ನು ದೇಶದ ಒಳತಿಗಾಗಿ ಮೀಸಲಿಟ್ಟಿದ್ದಾರೆ. ಇಡೀ ವಿಶ್ವವೇ ಬೆರಗಾಗುವಂತೆ ಭಾರತವನ್ನು ವಿಶ್ವದ ಭೂಪಟದಲ್ಲಿ ಗುರುತಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹವರು ಮತ್ತೊಮ್ಮೆ ಈ ದೇಶದ ಚುಕ್ಕಾಣಿ ಹಿಡಿಯಬೇಕೆಂಬುದು ಪ್ರತಿಯೊಬ್ಬ ನಾಗರೀಕನ ಕನಸಾಗಿದೆ. ದೇಶದ ಸುರಕ್ಷತೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ಎಲ್ಲರೂ ಶಕ್ತಿಮೀರಿ ಶ್ರಮಿಸುವಂತೆ ಅವರು ಹೇಳಿದರು.
ಅರಭಾವಿ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರೇಮಾ ಬಂಡಾರಿ, ಬಿಜೆಪಿ ಹಿರಿಯ ಮುಖಂಡ ಸುರೇಶ ಪಾಟೀಲ, ರಾಜಶೇಖರ ಯರಗಲ್, ನಾಗಲಿಂಗ ಪೋತದಾರ, ಗೋಕಾಕ ಗ್ರಾಮೀಣ ಬಿಜೆಪಿ ಅಧ್ಯಕ್ಷ ವಿರುಪಾಕ್ಷಿ ಯಲಿಗಾರ, ಎನ್ಎಸ್ಎಫ್ ಅತಿಥಿ ಗೃಹದ ನಿಂಗಪ್ಪ ಕುರಬೇಟ, ಮಹಾಶಕ್ತಿಕೇಂದ್ರಗಳ ಪ್ರಮುಖರು, ಬಿಜೆಪಿ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಸವರಾಜ ಮಾಳೇದವರ ಪ್ರಾಸ್ತಾವಿಕವಾಗಿ ಮಾತನಾಡಿದರು.
ತುಕ್ಕಾನಟ್ಟಿ ಹಾಗೂ ಹಳ್ಳೂರ ಜಿಲ್ಲಾ ಪಂಚಾಯತ, ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತ ಹಾಗೂ ಮೂಡಲಗಿ ಪುರಸಭೆ ವ್ಯಾಪ್ತಿಯಲ್ಲಿ ಮಹಾಶಕ್ತಿಕೇಂದ್ರಗಳ ಸಭೆ ನಡೆಸಲಾಯಿತು.
