ಮೂಡಲಗಿ:ಎಸ್. ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸನ್ಮಾನ
ಎಸ್. ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸನ್ಮಾನ
ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಮೇ 6 :
ಕಾರ್ಮಿಕರಿಗೆ ಜೀವ ವಿಮೆ, ವೃದ್ದಾಪ್ಯ ವೇತನ, ವೈದ್ಯಾಕೀಯ ವೆಚ್ಚ, ಮಕ್ಕಳ ಶಿಕ್ಷಣ ಮುಂತಾದ ಪ್ರಮುಖ ಸೌಲಭ್ಯಗಳನ್ನು ಕಾರ್ಮಿಕ ಇಲಾಖೆಯ ಮೂಲಕ ಸರ್ಕಾರ ನೀಡುತ್ತಿದ್ದು ಎಲ್ಲಾ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕಾರ್ಮಿಕ ನೀರಿಕ್ಷಕ ಪಿ.ವ್ಹಿ. ಮಾವರಕರ ಹೇಳಿದರು.
ಅವರು ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘ ಹಾಗೂ ಕಾರ್ಮಿಕ ಇಲಾಖೆಯ ಸಯೋಗದಲ್ಲಿ ಸೋಮವಾರ ಹಮ್ಮಿ ಕೊಂಡಿದ್ದ ಕಾರ್ಮಿಕರ ದಿನಾಚರಣೆ ಮತ್ತು ಸತ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರ ನೀಡುತ್ತಿರುವ ಸೌಲಭ್ಯದ ಬಗ್ಗೆ ಮಾಹಿತಿ ನೀಡುತ್ತ, ಕಟ್ಟಡ ಮತ್ತು ಇತರೆ ನಿರ್ಮಾಣ, ರಸ್ತೆ ಕಾಮಗಾರಿ, ವಿದ್ಯುತ್ ಕೆಲಸ ಮುಂತಾದ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗೆ ಸರ್ಕಾರ ಹಲವೂ ಸೌಲಭ್ಯಗಳನ್ನು ಒದಗಿಸುತ್ತಿದೆ. ಆದರೆ ಮಾಹಿತಿ ಮತ್ತು ತಿಳುವಳಿಕೆಯ ಕೊರತೆಯಿಂದ ಬಹಳಷ್ಟು ಕಾರ್ಮಿಕರು ತಮ್ಮ ಹೆಸರುಗಳನ್ನು ಇಲಾಖೆಯಲ್ಲಿ ನೊಂದಾಯಿಸಿಕೊಂಡಿಲ್ಲ. ಈ ನಿಟ್ಟಿನಲ್ಲಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಎಲ್ಲಾ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ಅಗತ್ಯ ದಾಖಲೆಯನ್ನು ನೀಡಿ ನೊಂದಾಣಿ ಮಾಡಿಸಿಕೊಂಡು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಿ. ಕಾರ್ಮಿಕರಿಗೆ ಉಪಯೋಗವಾಗಲಿ ಎಂಬ ಉದ್ದೇಶದಿಂದ ಸ್ಥಳೀಯ ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘವೂ ಶ್ರಮಿಸುತ್ತಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದರು.
ವಕೀಲರ ಸಂಘದ ಕಾರ್ಯದರ್ಶಿ ಎಲ್.ವಾಯ್. ಅಡಿಹುಡಿ ಮಾತನಾಡಿ, ಕಾರ್ಮಿಕರ ಮಕ್ಕಳು ಕಾರ್ಮಿಕರಾಗದೇ ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಗೌರವನ್ವಿತ ವ್ಯಕ್ತಿಗಳಾಗಿ ಜೀವನ ಸಾಗಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು, ಸ್ವಚ್ಚತೆ ಹಾಗೂ ಪರಿಸರ ಸಂರಕ್ಷಣೆಯ ಬಗ್ಗೆ ಹೆಚ್ಚಿನ ಗಮನಹರಿಸಿ ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಪುರಸಭೆ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ ಮಾತನಾಡಿ, ದೇಶದ ನಿರ್ಮಾಣ ಕಾರ್ಯದಲ್ಲಿ ಕಾರ್ಮಿಕರ ಪಾತ್ರ ಮಹತ್ತರವಾದದ್ದು. ಕಾರ್ಮಿಕರ ಹಿತದೃಷ್ಟಿಯಿಂದ ಸರಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಇವುಗಳ ಬಗ್ಗೆ ವ್ಯಾಪಕವಾದ ಪ್ರಚಾರ ಮಾಡಬೇಕಾಗಿದೆ. ಪ್ರತಿಯೊಬ್ಬರಿಗೂ ಸರ್ಕಾರದ ಸೌಲಭ್ಯ ತಲುಪಿದಾಗ ಮಾತ್ರ ಯೋಜನೆಗೆ ಯಶಸ್ಸು ದೊರೆಯುತ್ತದೆ ಎಂದರು.
ಮೂಡಲಗಿ ವಕೀಲರ ಸಂಘದ ಅಧ್ಯಕ್ಷ ಕೆ.ಪಿ.ಮಗದುಮ್ ಮಾತನಾಡಿ, ಕಾರ್ಮಿಕರು ದುಶ್ಚಟಕ್ಕೆ ಬಲಿಯಾಗದೇ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು.
ಕಾರ್ಮಿಕರ ದಿನಚರಣೆಯ ಅಂಗವಾಗಿ ಪುರಸಭೆಯ ಪೌರ ಕಾರ್ಮಿಕ ಪಾಂಡು ಹರಿಜನ ಹಾಗೂ ಎಸ್. ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಕಟ್ಟಡ ಕಾರ್ಮಿಕರ ಮಕ್ಕಳಾದ ಸುಭಾಸ್ ಖಾನಟ್ಟಿ, ವೀಣಾ ಪುಂಡೆ, ರಮೇಶ ಗಾಣಿಗ ಇವರನ್ನು ಸಂಘದಿಂದ ಸತ್ಕರಿಸಲಾಯಿತು.
ಮೂಡಲಗಿ ಸಿದ್ದ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಶ್ರೀಪಾದಬೋದ ಸ್ವಾಮೀಜಿ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು. ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಅಧ್ಯಕ್ಷ ಬಸವರಾಜ ಪೋಳ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಧಿಕಾರಿ ಜಿ.ಆರ್ ಪೂಜೇರಿ, ಗುತ್ತಿಗೆದಾರರಾದ ಎಸ್.ಎಸ್.ಮೋಕಾಶಿ, ಚಂದ್ರು ಗಾಣಿಗ, ಸಿದ್ದಣ್ಣ ದುರದುಂಡಿ, ಯುವ ಜೀವನ ಸೇವ ಸಂಸ್ಥೆಯ ಅಧ್ಯಕ್ಷ ಈರಪ್ಪ ಢವಳೇಶ್ವರ, ಭಗವಂತ ಉಪ್ಪಾರ, ಭೀರಪ್ಪ ಮಾಳಗಿ, ರಾಜು ಪೂಜೇರಿ, ದಶರಥ ಬಂಡಿವಡ್ಡರ, ಹಸನಸಾಬ ಕುರಬೆಟ, ಶಾನೂರು ಉಪ್ಪಾರ, ಬಸಪ್ಪ ಖಾನಟ್ಟಿ, ಸೇರಿದಂತೆ ನೂರಾರು ಕಾರ್ಮಿಕರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಗುರುನಾಥ ಗಂಗನ್ನವರ ನಿರೂಪಿಸಿ, ಸುಧೀರ ನಾಯರ್ ಸ್ವಾಗತಿಸಿದರು. ಸುಭಾಸ್ ಗೊಡ್ಯಾಗೋಳ ವಂದಿಸಿದರು.